ಯಲ್ಲಾಪುರ ; ಅಂಕೋಲಾ ತಾಲ್ಲೂಕಿನ ವಾಸರಕುದ್ರಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಿಂದ ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗುವ ಸಂಭವ ಇರುವುದರಿಂದ ನದಿ ತಡದಲ್ಲಿರುವ ಕುಟುಂಬಸ್ಥರು ಮತ್ತು ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಲಕ್ಷ್ಮಿಪ್ರೀಯಾ ಸೂಚಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಮಳೆಯಿಂದ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾಮಪಂಚಾಯತ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿರುತ್ತದೆ. ಭೂಕುಸಿತದಲ್ಲಿ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಉರುಳಿ ಬಿದ್ದಿದ್ದು. ಸದ್ರಿ ಗ್ಯಾಸ್ ಟ್ಯಾಂಕರ್ ಗಳು ಸೋರಿಕೆಯಾಗುವ ಸಾಧ್ಯತೆಯಿರುವುದರಿಂದ, ನದಿ ದಡದಲ್ಲಿರುವ ಮನೆಗಳಲ್ಲಿ ವಾಸವಿರುವ ಸಾರ್ವಜನಿಕರು,
ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಅತ್ಯವಶಕವಾಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರು, ಸಹಾಯಕ ಆಯುಕ್ತರು ಕೂಡಲೇ ಮುನ್ನೆಚರಿಕೆ ಕ್ರಮವಾಗಿ ನದಿ ದಡದಲ್ಲಿರುವ ಎಲ್ಲಾ ಮನೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಸುರಕ್ಷಿತ ಸ್ಥಳಗಳಾದ ಕಾಳಜಿ ಕೇಂದ್ರದಲ್ಲಿ ಸ್ಥಳಾಂತರಿಸಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮತ್ತು ಕಟ್ಟುನಿಟ್ಟಿನ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳಲು ಅವರು ಆದೇಶಿಸಿದ್ದಾರೆ.