
ಯಲ್ಲಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಲ್ಲಾಪುರದಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್ ಹಾಗೂ ವಿವಿಧ ವೇದಿಕೆಗಳ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 30, ರಂದು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನೂತನವಾಗಿ ಸ್ಥಾಪಿಸಿದ ಸರಸ್ವತಿ ವಿಗ್ರಹವನ್ನು ಶಾಸಕರಾದ ಶಿವರಾಮ ಹೆಬ್ಬಾರ ಅನಾವರಣಗೊಳಿಸಿದರು. ನಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಗೆ ದಿನಕರ ದೇಸಾಯಿಯವರು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿರುವ ಕುರಿತು ಅಭಿಮಾನ ವ್ಯಕ್ತಪಡಿಸಿದರು. "ಅವರ ಶೈಕ್ಷಣಿಕ ತಳಹದಿಯು ನಮಗೆಲ್ಲ ಆದರ್ಶವಾಗಬೇಕು," ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಾಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿರುವ ಡಾ. ಮಹಾವೀರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಂಡು, ಸುಂದರ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲರಾದ ಡಾ. ಆರ್. ಡಿ. ಜನಾರ್ಧನ್ ಅವರು, "ಈ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸಿದ್ಧಾಂತಗಳನ್ನು ತಂತ್ರಜ್ಞಾನದ ಮಟ್ಟಕ್ಕೆ ಕೊಂಡೊಯ್ಯುವ ಶಕ್ತಿಯನ್ನು ಬೆಳೆಸಬೇಕು," ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಐ.ಕ್ಯೂ.ಎ.ಸಿ ಸಂಚಾಲಕರಾದ ಶರತ್ ಕುಮಾರ್ ವಿದ್ಯಾರ್ಥಿ ಪರಿಷತ್ ಪರಿಚಯಿಸಿ, ಪ್ರತಿಜ್ಞಾವಿಧಿ ಬೋಧಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ವಿಜಯ ಮಿರಾಶಿ, ಗೋಪಾಲಕೃಷ್ಣ ಜಿ ನೇತ್ರೇಕರ, ಸುನಂದಾ ದಾಸ್ ಹಾಗೂ ಅನೇಕ ಗಣ್ಯರು ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಸವಿತಾ ನಾಯ್ಕ ಸ್ವಾಗತಿಸಿ, ವೇದಾ ಭಟ್ಟ ಪ್ರಾರ್ಥನೆ ಸಲ್ಲಿಸಿದರು. ಮೇಘಾ ದೇವಳಿ ವಂದನೆ ಸಲ್ಲಿಸಿದರು, ಹಾಗೂ ಆಶಾ ನಾಯ್ಕ ಕಾರ್ಯಕ್ರಮವನ್ನು ನಿರ್ವಹಿಸಿದರು.